ಹರ್ಯಾಣ ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಮತದಾರರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದೆ. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಹೀಗೆ ಭರವಸೆಗಳ ಮೇಲೆ ಭರವಸೆ ನೀಡಿದ್ದು ಪಕ್ಷ ಗೆಲುವು ಸಾಧಿಸಲು ನೂತನ ತಂತ್ರಗಳನ್ನು ಹೆಣೆದಿದೆ.
ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಖಾಸಗೀ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದು, ಹರ್ಯಾಣ ರಾಜ್ಯಾದ್ಯಂತ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದೆ.
ಸ್ಥಳೀಯ ಸಂಸ್ಥೆಗಳಾದ ಪಂಚಾಯತ್ ರಾಜ್, ಮುನಿಸಿಪಲ್ ಕಾರ್ಪೋರೇಷನ್, ಸಿಟಿ ಕೌನ್ಸಿಲ್ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ, ರಾಜ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಿರುದ್ಯೋಗಿಗಳಾಗಿರುವವರಿಗೆ ಪ್ರತಿ ತಿಂಗಳು 12 ಸಾವಿರ, ನಿರುದ್ಯೋಗಿ ಪದವೀಧರರಿಗೆ 7 ಸಾವಿರ ನಿರುದ್ಯೋಗ ಭತ್ಯೆ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಹರ್ಯಾಣ ಉಸ್ತುವಾರಿ ಗುಲಾಂ ನಬೀ ಅಜಾದ್, ಹರ್ಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ, ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಹೂಡಾ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ರೈತರ ಎಲ್ಲಾ ರೀತಿಯ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬರ ಅಥವಾ ಪ್ರಕೃತಿ ವಿಕೋಪ ಬಂದೆರಗಿ ಬೆಳೆ ಹಾನಿಯಾದರೆ ಪ್ರತಿ ಎಕರೆಗೆ 12 ಸಾವಿರ ರೂಪಾಯಿ ಬೆಳೆ ನಷ್ಟ ಪರಿಹಾರ ನೀಡುವುದಾಗಿ ಹೇಳಿದ್ದು, ನಮ್ಮ ಸರ್ಕಾರ ರೈತರ ನೆರವಿಗೆ ಸದಾ ಸಿದ್ಧ ಎಂಬುದಾಗಿ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಹೂಡಾ ಮಾತನಾಡಿ, ಎರಡು ಎಕರೆ ನೀರಾವರಿ ಭೂಮಿ ಹೊಂದಿರುವ ಪ್ರತಿಯೊಬ್ಬ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು. ವಿದ್ಯುತ್ ಗಾಗಿ ಯಾವುದೇ ಶುಲ್ಕ ವಿಧಿಸುವುದಿಲ್ಲ. ದೆಹಲಿಯ ಆಮ್ ಆದ್ಮಿ ಪಕ್ಷ ಇತ್ತೀಚೆಗಷ್ಟೇ ಮಹಿಳೆಯರಿಗೆ ಮೆಟ್ರೋ ರೈಲು ಮತ್ತು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈಗ ಇದೇ ಮಾದರಿಯನ್ನೂ ಕಾಂಗ್ರೆಸ್ ಸರ್ಕಾರ ಹರ್ಯಾಣ ರಾಜ್ಯದಲ್ಲಿ ಅನುಸರಿಸಲಿದೆ ಎಂದರು.
ಹರ್ಯಾಣದ ಹಾಲಿ ಮುಖ್ಯಮಂತ್ರಿ ಇತ್ತೀಚೆಗಷ್ಟೇ ರೈತರ 4,700 ಕೋಟಿ ರೂಪಾಯಿ ಮನ್ನಾ ಮಾಡುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೆಲ್ಲವನ್ನೂ ನೋಡಿದರೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಅನುಸರಿಸುತ್ತಿರುವ ನೀತಿ ಅನುಷ್ಠಾನಕ್ಕೆ ಬರಬೇಕಾಗಿದೆ. ಇಲ್ಲದಿದ್ದರೆ ಯಾವ ಭರವಸೆಗಳು ಜನರ ಕೈಹಿಡಿಯುವುದಿಲ್ಲ ಎಂಬುದಂತು ದಿಟ.